Menu

Home ನಲಿಕಲಿ About ☰ Menu


 

🔍

ಜಯ ಭಾರತ ಜನನಿಯ ತನುಜಾತೆ (ನಾಡಗೀತೆ)

ಜಯ ಭಾರತ ಜನನಿಯ ತನುಜಾತೆ, 

ಜಯ ಹೇ ಕರ್ನಾಟಕ ಮಾತೆ!

ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!
ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ
ಭಾರತ ಜನನಿಯ ತನುಜಾತೆ !

ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ
ಹಸುರಿನ ಗಿರಿಗಳ ಸಾಲೇ,ನಿನ್ನಯ ಕೊರಳಿನ ಮಾಲೆ
ಕಪಿಲ ಪತಂಜಲ ಗೌತಮ ಜಿನನುತ,
ಭಾರತ ಜನನಿಯ ತನುಜಾತೆ !

ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶ್ವರ ಮಧ್ವರ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ
ಕುಮಾರವ್ಯಾಸನ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ !

ತೈಲಪ ಹೊಯ್ಸಳರಾಳಿದ ನಾಡೇ,
ಡಂಕಣ ಜಕಣರ ನಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ,
ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ,
ಭಾರತ ಜನನಿಯ ತನುಜಾತೆ !

ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ

ಸಾಹಿತ್ಯ: ಕುವೆಂಪು

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post